Breaking News
ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ (DYSP) ಡಿವೈಎಸ್ಪಿ

ಶಿವಮೊಗ್ಗ: ಸಿಬ್ಬಂದಿಯೋರ್ವರಿಂದ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಸಶಸ್ತ್ರ ಮೀಸಲು ಪೊಲೀಸ್ ಪಡೆ(ಡಿಎಆರ್) ಡಿವೈಎಸ್ಪಿ ಓರ್ವರನ್ನು, ಲಂಚದ ಹಣದ ಸಮೇತ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದವರೆಂದು ಗುರುತಿಸಲಾಗಿದೆ. ಇವರು ತಮ್ಮ ನಿವಾಸದಲ್ಲಿ ಸಿಬ್ಬಂದಿಯೋರ್ವರಿಂದ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಕರ್ತವ್ಯಕ್ಕೆ ನಿಯೋಜನೆ ಮಾಡುವುದಕ್ಕೆ ಸಂಬಂಧಿಸಿದಂತೆ ಡಿಎಆರ್ ಸಿಬ್ಬಂದಿ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಸಿಬ್ಬಂದಿಯು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು. ಮಂಗಳವಾರ ತಮ್ಮ ನಿವಾಸದಲ್ಲಿ ಸಿಬ್ಬಂದಿಯಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಲಂಚದ ಹಣದ ಸಮೇತ ಡಿವೈಎಸ್ಪಿಯನ್ನು ಬಂಧಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದ ಪೊಲೀಸ್ ತಂಡ ಸದರಿ ಕಾರ್ಯಾಚರಣೆ ನಡೆಸಿತ್ತು.


