
ಧಾರವಾಡ: ರಾಜ್ಯದ ನಿರುದ್ಯೋಗಿ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದ್ದು, ಶೀಘ್ರದಲ್ಲೇ 56,000 ಹೊಸ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿಳಿಸಿದರು.
ನಗರದ ಕರ್ನಾಟಕ ಕಾಲೇಜು (ಕೆಸಿಡಿ) ಆವರಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಇಂತಹ ಮೇಳಗಳನ್ನು ಆಯೋಜಿಸುವ ಮೂಲಕ ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಗೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ಅವರು ಇಂದು (ಫೆ.24) ಬೆಳಿಗ್ಗೆ ಕರ್ನಾಟಕ ಕಾಲೇಜು (ಕೆಸಿಡಿ) ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಿ, ಮಾತನಾಡಿದರು.
ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಡದಲ್ಲಿ ಉದ್ಯೋಗ ಮೇಳ
ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯದಾದ್ಯಂತ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದ್ದು, ಉದ್ಯೋಗಾವಕಾಶಗಳಿಗಾಗಿ ನಿರೀಕ್ಷೆಯಲ್ಲಿರುವ ಯುವಕರಿಗೆ ವೇದಿಕೆ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಧಾರವಾಡ ಜಿಲ್ಲೆಯ ಉದ್ಯೋಗ ಮೇಳದಲ್ಲಿ ನಿರುದ್ಯೋಗ ಮತ್ತು ಆಸಕ್ತ ಯುವಕ, ಯುವತಿಯರಿಂದ ಉತ್ತಮ ಸ್ಪಂದನೆ ಸೀಗುತ್ತಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಡದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ. ಉದ್ಯೋಗಕ್ಕೆ ಹಾಜರಾದ ಅಭ್ಯರ್ಥಿಗಳಿಂದ ಪೀಡ್ ಬ್ಯಾಕ್ ಪಡೆಯಲಾಗುತ್ತದೆ. ಈ ಕುರಿತು ಕ್ರಮ ವಹಿಸಲು ಕೌಶಲ್ಯಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.
ಸರ್ಕಾರ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಬದ್ಧವಾಗಿದ್ದು, ಈಗಾಗಲೇ 40,000ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಉದ್ಯೋಗದಾತರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸುವುದು ಉದ್ಯೋಗ ಮೇಳಗಳ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
56,000 ಹೊಸ ಹುದ್ದೆಗಳ ನೇಮಕಾತಿ
ಸರ್ಕಾರವು ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದ್ದು, 56,000 ಹೊಸ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯನ್ನು ಬಜೆಟ್ನಲ್ಲಿ ತೆಗೆದುಕೊಂಡು ನಿರ್ಣಯ ಮಾಡಿದ್ದಾರೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಲು ಸರ್ಕಾರ ನಿರಂತರ ಪ್ರಯತ್ನಿಸುತ್ತಿದ್ದು, ಯುವಕರು ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್ ಅವರು ಕರೆ ನೀಡಿದರು.



