
ಬೆಳಗಾವಿ: ಆರ್ಥಿಕವಾಗಿ ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕೆ ಸಹಾಯವಾಗುವಂತೆ ಸರ್ಕಾರದ ವತಿಯಿಂದ ಹೊಲಿಗೆ ಯಂತ್ರಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಗೋಕಾಕ ನಗರದ ಗೃಹಕಚೇರಿಯಲ್ಲಿ ನಮ್ಮ ಯಮಕಮರಡಿ ಕ್ಷೇತ್ರದ ವಿವಿಧ ಅರ್ಹ ಫಲಾನುಭವಿಗಳಿಗೆ ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳಾ ಸಬಲೀಕರಣದ ಉದ್ದೇಶದಿಂದ ಹೊಲಿಗೆ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು.
ಆರ್ಥಿಕವಾಗಿ ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕೆ ಸಹಾಯವಾಗುವಂತೆ ಸರ್ಕಾರದ ವತಿಯಿಂದ ಹೊಲಿಗೆ ಯಂತ್ರಗಳನ್ನು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿ ವಿತರಣೆ ಮಾಡಲಾಗುತ್ತಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಮೂಲಕ ಆರ್ಥಿಕವಾಗಿ ಸದೃಢರಾಗಿ ಸ್ವಾಭಿಮಾನದಿಂದ ಬದುಕಬೇಕೆಂದು ಕರೆ ನೀಡಿದರು.
ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸುವ ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಮುಂದೆ ಬರುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ದುಡಿದ ಹಣದಲ್ಲಿ ಸ್ವಲ್ಪ ಭಾಗದಷ್ಟು ಉಳಿತಾಯ ಮಾಡಿ ಸಂಕಷ್ಟದ ಸಮಯದಲ್ಲಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಭರವಸೆ ಕೊಟ್ಟಂತೆ ಎಲ್ಲಾ ಯೋಜನೆಗಳನ್ನು ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ಅನುಷ್ಠಾನ ಗೊಳಿಸುತ್ತಿದ್ದು, ಸಂಕಷ್ಟದಲ್ಲಿ ಕೈಹಿಡಿದಿರುವ ಕಾಂಗ್ರೆಸ್ ಪಕ್ಷದ ರಕ್ಷಣೆಗೆ ಮಹಿಳೆಯರು ನಿಲ್ಲಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಯಮಕಮರಡಿ ಕ್ಷೇತ್ರದ ಮುಖಂಡು ಹಾಗೂ ಇತರರು ಇದ್ದರು.



