ನೇರ ಎಚ್ಚರಿಕೆ ಕೊಟ್ಟ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

ಬೆಳಗಾವಿಯಲ್ಲಿ ಕನ್ನಡದಲ್ಲಿ ಮಾತನಾಡಿ ಎಂದ ಬಸ್ ಕಂಡಕ್ಟರ್ ಮೇಲೆ ಕೆಲ ಮರಾಠಿ ಪುಂಡರ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕಂಡಕ್ಟರ್ಗೆ ಮರಾಠಿ ಬರುವುದಿಲ್ಲ ಎಂಬ ಕಾರಣಕ್ಕೆ ಪುಂಡರು ಕನ್ನಡಿಗನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕೂಡ ಖಂಡನೆ ವ್ಯಕ್ತಪಡಿಸಿದ್ದಾರೆ.
ಕನ್ನಡದಲ್ಲಿ ಮಾತನಾಡಿದ್ದಕ್ಕೆ, ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹದೇವ ಎಂಬ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿ ಪೊಲೀಸರು ಮಹದೇವ ಅವರ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬನನ್ನೂ ಬಂಧಿಸಿ ಜೈಲಿಗೆ ಕಳುಹಿಸಬೇಕು. ಇಲ್ಲವಾದಲ್ಲಿ ಇದರ ಪರಿಣಾಮ ಭೀಕರವಾಗುತ್ತದೆ ಎಂದು ಟಿ.ಎ.ನಾರಾಯಣಗೌಡ ಎಚ್ಚರಿಕೆ ಕೊಟ್ಟಿದ್ದಾರೆ.
ಕನ್ನಡಿಗರು ಸೌಹಾರ್ದಪ್ರಿಯರು, ಶಾಂತಿಪ್ರಿಯರು. ಹಾಗೆಂದ ಮಾತ್ರಕ್ಕೆ ನಮ್ಮ ಮೇಲೆ ವಿನಾಕಾರಣ ಹಲ್ಲೆ ನಡೆಸುವ ಭಾಷಾಂಧರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಕಿತ್ತುಕೊಳ್ಳಲು ನಡೆಸಿದ ಪ್ರಯತ್ನಗಳೆಲ್ಲ ವಿಫಲವಾದ ಮೇಲೆ ಹತಾಶರಾಗಿರುವ ಭಾಷಾಂಧ ಮರಾಠಿ ಪುಂಡರು ಈಗ ಕನ್ನಡಿಗರ ಮೇಲೆ ಕೈಮಾಡುವ ನೀಚ ಕೃತ್ಯಕ್ಕೆ ಇಳಿದಿದ್ದಾರೆ. ಪೊಲೀಸರು ಇವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಕನ್ನಡಿಗರ ಸಿಟ್ಟು ರಟ್ಟೆಗೆ ಬರುತ್ತದೆ. ಅಂತಹ ಸಂಘರ್ಷಕ್ಕೆ ಎಡೆ ಮಾಡಿಕೊಡದೇ ಪುಂಡರನ್ನು ಮೊದಲು ಬಂಧಿಸಿ ಎಂದು ಆಗ್ರಹಿಸಿದ್ದಾರೆ.
ಹಲ್ಲೆಗೊಳಗಾದ ಮಹದೇವ ಅವರು ಬೇಗ ಗುಣಮುಖರಾಗಲಿ, ಅವರೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಇರುತ್ತದೆ. ಈಗಾಗಲೇ ನಮ್ಮ ಕರವೇ ಬೆಳಗಾವಿ ಜಿಲ್ಲಾಧ್ಯಕ್ಷರಾದ ದೀಪಕ್ ಗುಡಗನಟ್ಟಿ ಸೇರಿದಂತೆ ನಮ್ಮ ಪದಾಧಿಕಾರಿಗಳು ಮಹದೇವ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ, ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕೆಎಸ್ಆರ್ಟಿಸಿ ಚಾಲಕರು, ನಿರ್ವಾಹಕರು ಈ ಘಟನೆಯಿಂದ ಧೃತಿಗೆಡುವ ಅವಶ್ಯಕತೆ ಇಲ್ಲ. ಇಂತಹ ಹೇಡಿಗಳಿಗೆ ಬೆದರುವ ಅಗತ್ಯವೂ ಇಲ್ಲ ಎಂದು ಅಭಯ ನೀಡಿದ್ದಾರೆ.
ಕರ್ನಾಟಕದ ನೆಲದಲ್ಲಿ ಬದುಕುವವರು ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು. ಅದನ್ನು ಹೊರತುಪಡಿಸಿ ತಮ್ಮ ಭಾಷೆ ಕಲಿಯಿರಿ ಎಂದು ತಾಕೀತು ಮಾಡಿ ದೌರ್ಜನ್ಯ ನಡೆಸಲು ಹೊರಟರೆ, ಅಂಥವರಿಗೆ ಕರ್ನಾಟಕ ರಕ್ಷಣಾ ವೇದಿಕೆ ತಕ್ಕ ಪಾಠ ಕಲಿಸಲಿದೆ. ಇದು ನನ್ನ ನೇರವಾದ ಎಚ್ಚರಿಕೆ ಎಂದು ಗುಡುಗಿದ್ದಾರೆ.
ಏನಿದು ಘಟನೆ?: ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೆಕುಂದ್ರಿಯಲ್ಲಿ ನಿನ್ನೆ ಮರಾಠಿ ಮಾತನಾಡಲು ಬರುವುದಿಲ್ಲ ಎಂದಿದ್ದಕ್ಕೆ ಕೆಎಸ್ಆರ್ಟಿಸಿ ಚಾಲಕ ಮತ್ತು ನಿರ್ವಾಹಕನ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗಾಯಗೊಂಡಿದ್ದ ನಿರ್ವಾಹಕ ಮಹಾದೇವ ಹುಕ್ಕೇರಿ ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ನಗರ ಬಸ್ ನಿಲ್ದಾಣದಿಂದ ಯುವಕ ಹಾಗೂ ಯುವತಿ ಬಸ್ ಹತ್ತಿದ್ದರು. ಕಂಡಕ್ಟರ್ ಮಹಾದೇವ ಟಿಕೆಟ್ ಪಡೆಯುವಂತೆ ಕನ್ನಡದಲ್ಲಿ ಕೇಳಿದ್ದರು. ಆಗ ಯುವಕ ಕನ್ನಡದಲ್ಲಿ ಯಾಕೆ ಬೊಗಳುತ್ತೀಯಾ ಮರಾಠಿ ಕಲಿ ಎಂದು ಕಂಡಕ್ಟರ್ಗೆ ಬೆದರಿಕೆ ಹಾಕಿದ್ದು, ಬಸ್ ಬಾಳೆಕುಂದ್ರಿಗೆ ಬಂದಾಗ ಹಲವರನ್ನ ಕರೆಸಿಕೊಂಡು ಹಲ್ಲೆ ಮಾಡಿಸಿದ್ದಾನೆ.


